ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್





""ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಆನೆಬಲ- ಅರುಣ್ ಸಿಂಗ್""
ಬೆಂಗಳೂರು: ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯ ಪದಾಧಿಕಾರಿಗಳ ಸಭೆಯ ಉದ್ಘಾಟನೆ ನೆರವೇರಿಸಿದ್ದಾರೆ. ಕೇಂದ್ರದ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಗೆ ಆದರಣೀಯ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಬಿ.ಎಲ್.ಸಂತೋಷ್ ಅವರ ನೇಮಕವನ್ನು ಸಭೆಯು ಒಕ್ಕೊರಲಿನಿಂದ ಸ್ವಾಗತಿಸಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು “ರಾಜ್ಯ ಪದಾಧಿಕಾರಿಗಳ ಸಭೆಯ” ಉದ್ಘಾಟನಾ ಸಮಾರಂಭದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಕರ್ನಾಟಕದ ರಾಜಕೀಯದಲ್ಲಿ ಮಹತ್ತರವಾದ ಕಾರ್ಯವನ್ನು ನಿರ್ವಹಿಸುವ ಅವಕಾಶವಾಗಿದೆ ಎಂದು ಅರುಣ್ ಸಿಂಗ್ ತಿಳಿಸಿದರು ಎಂದು ವಿವರಿಸಿದರು.
ಕರ್ನಾಟಕದ ಪ್ರತಿಯೊಂದು ಬೂತ್ ಅನ್ನು ಕನಿಷ್ಠ 50ಕ್ಕೂ ಹೆಚ್ಚು ಮತ ಪಡೆಯುವ ಬೂತ್ ಆಗಿ ಪರಿವರ್ತಿಸಬೇಕು. ಅದಕ್ಕಾಗಿ ರಾಜ್ಯದ- ಜಿಲ್ಲಾ ಪದಾಧಿಕಾರಿಗಳು ತಿಂಗಳಿಗೆ 15 ದಿನ ಪ್ರವಾಸ ಮಾಡಲು ತಿಳಿಸಿದ್ದಾಗಿ ಹೇಳಿದರು. 
ಪಕ್ಷದ ವಿಚಾರದಲ್ಲಿ ಚರ್ಚೆ ಮಾಡುವುದು ಬಿಜೆಪಿಯ ಶಿಸ್ತಿನ ಕಾರ್ಯಕರ್ತನ ಲಕ್ಷಣ ಅಲ್ಲ. ಅಶಿಸ್ತನ್ನು ಪಕ್ಷ ಸಹಿಸುವುದಿಲ್ಲ. ಪದೇಪದೇ ಈ ರೀತಿ ಮಾತನಾಡುವುದನ್ನು ಪಕ್ಷ ಸಹಿಸುವುದಿಲ್ಲ. ಆದ್ದರಿಂದ ಎಲ್ಲರೂ ಅಭಿವೃದ್ಧಿ ಮತ್ತು ಕಾರ್ಯಕ್ಕೆ ಆದ್ಯತೆ ಕೊಡಬೇಕೆಂದು ಅರುಣ್ ಸಿಂಗ್ ಅವರು ತಿಳಿಸಿದ್ದಾಗಿ ಪ್ರಶ್ನೆಗೆ ಉತ್ತರ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಮಾತನಾಡಿ ಪ್ರಸ್ತುತ ವಿದ್ಯಮಾನಗಳ ಕುರಿತು ವಿವರಿಸಿದ್ದಾಗಿ ಹೇಳಿದರು.
ಸಾವರ್ಕರ್ ಅವರನ್ನು ಮತಬ್ಯಾಂಕ್ ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷವು ಅವಹೇಳನ ಮಾಡುವುದು ಖಂಡನೀಯ ಎಂದು ಸಭೆ ತಿಳಿಸಿತು. ತುಷ್ಟೀಕರಣ ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ವೀರ ಸಾವರ್ಕರ್ ಅವರ ಬಗ್ಗೆ ಅನುಸರಿಸುತ್ತಿರುವ ನಿಲುವನ್ನು  ಸಭೆ ಅತ್ಯುಗ್ರವಾಗಿ ಖಂಡಿಸಿತು ಎಂದರು.
ಮುಖಂಡರ ಪ್ರವಾಸ- ಜನೋತ್ಸವ ವಿಷಯ ನಿರ್ಧಾರ
ಮುಂದಿನ ಒಂದು ತಿಂಗಳ ರಾಜ್ಯ ಪ್ರವಾಸಗಳ ಕುರಿತು ನಿರ್ಧರಿಸಲಾಯಿತು. ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರು ತಲಾ 50 ಅಸೆಂಬ್ಲಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕೆಂದು ಸಭೆ ನಿರ್ಧರಿಸಿದೆ ಎಂದು ತಿಳಿಸಿದರು. ಸೆಪ್ಟೆಂಬರ್ ಮೊದಲ ವಾರದಿಂದÀ ಅಕ್ಟೋಬರ್ ಮಧ್ಯಭಾಗದವರೆಗೆ ಕರ್ನಾಟಕದ 7 ಕಡೆ ದೊಡ್ಡದಾದ ಜನೋತ್ಸವ ಸಮಾವೇಶಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ದೊಡ್ಡಬಳ್ಳಾಪುರದಲ್ಲಿ ಮೊದಲ ಸಮಾವೇಶ ನಡೆಯಲಿದೆ ಎಂದರು.
ಮುಂದಿನ ರಾಜ್ಯ ಕಾರ್ಯಕಾರಿಣಿಯನ್ನು ಸೆಪ್ಟೆಂಬರ್ 10 ಮತ್ತು 11ರಂದು ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ವಿವರ ನೀಡಿದರು. 3 ತಿಂಗಳಿಗೊಮ್ಮೆ ಈ ಕಾರ್ಯಕಾರಿಣಿ ನಡೆಯುತ್ತಿದೆ ಎಂದರು. ರಾಜ್ಯ ಅಸೆಂಬ್ಲಿಯಲ್ಲಿ 145ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿಯವರ ಪಂಚ ಸಂಕಲ್ಪಗಳು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಂಚ ಯೋಜನೆಗಳನ್ನು ಬಳಸಿಕೊಳ್ಳಬೇಕು. ಈ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಲಾಗಿದೆ ಎಂದರು.

                                           
 

Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News