ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
ಹೆಚ್ಎಸ್'ವಿ ಎಂದೇ ಪ್ರಸಿದ್ಧರಾಗಿದ್ದ ಕನ್ನಡದ ಮೇರು ಸಾಹಿತಿ, ಖ್ಯಾತ ನಾಟಕ ರಚನಾಕಾರರು ಹಾಗೂ ವಿಮರ್ಶಕರಾದ ಹೆಚ್.ಎಸ್. ವೆಂಕಟೇಶ ಮೂರ್ತಿಯವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸು ಭಾರವಾಗಿದೆ. ಇವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ 100 ಕ್ಕೂ ಹೆಚ್ಚು ಕೃತಿಗಳನ್ನು ಹಾಗೂ ಕನ್ನಡ ಚಿತ್ರರಂಗಕ್ಕೆ ಹಲವು ಗೀತೆಗಳು ಹಾಗೂ ಸಂಭಾಷಣೆಗಳನ್ನು ರಚಿಸಿ ಕನ್ನಡಾಂಬೆಯ ಸೇವೆಗೈದಿದ್ದಾರೆ. ಶ್ರೀಯುತರು ರಚಿಸಿರುವ 'ಲೋಕದ ಕಣ್ಣಿಗೆ ರಾಧೆಯು ಕೂಡ ಎಲ್ಲರಂತೆಯೇ ಒಂದು ಹೆಣ್ಣು', 'ಹುಚ್ಚು ಕೋಡಿ ಮನಸು ಅದು ಹದಿನಾರರ ವಯಸ್ಸು', 'ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ', 'ಪ್ರೀತಿ ಕೊಟ್ಟ ರಾಧೆಗೆ ಮಾತು ಕೊಟ್ಟ ಮಾಧವ' ಹಾಗೂ 'ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆ' ಎನ್ನುವಂತಹ ಹತ್ತಾರು ಭಾವಗೀತೆ ಹಾಗೂ ಚಿತ್ರಗೀತೆಗಳು ಸದಾ ನಮ್ಮೆಲ್ಲರಲ್ಲೂ ಗುನುಗುಟ್ಟುವುದು ಅವರ ಸಾಹಿತ್ಯ ಪ್ರತಿಭೆಗೆ ಸಾಕ್ಷಿಯಾಗಿವೆ.